ಕೆ.ಆರ್.ಪೇಟೆಯ ಶೆಟ್ಟನಾಯಕನಕೊಪ್ಪಲು ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆ ಹೆಣ್ಣುಮಕ್ಕಳ ಕರಾಟೆ ಕೌಶಲ್ಯ ವೀಕ್ಷಿಸಿದ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸಪೂಜಾರಿ..
ಕೆ.ಆರ್.ಪೇಟೆ:– ರಾಜ್ಯ ವಸತಿ ಶಾಲೆಗಳ ಹೆಣ್ಣುಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ‘ಕರಾಟೆ’ ಯೋಜನೆಯಡಿ ಕರಾಟೆ ಯೋಜನೆ ಅನುಷ್ಠಾನಕ್ಕಾಗಿ 18 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕು ಶೆಟ್ಟಿನಾಯಕನಕೊಪ್ಪಲು ಗ್ರಾಮದಲ್ಲಿರುವ ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆಗೆ ಗುರುವಾರ ಭೇಟಿ ನೀಡಿ ಹೆಣ್ಣು ಮಕ್ಕಳ ಕರಾಟೆ ಕೌಶಲ್ಯವನ್ನು ವೀಕ್ಷಿಸಿದ ಸಚಿವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು ಅವರಿಗೆ ಆತ್ಮರಕ್ಷಣೆ ಕಲೆ ಅಗತ್ಯವಾಗಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದ್ದು, ಸುಮಾರು ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18ಕೋಟಿ ರೂ.ಗಳನ್ನು ವೆಚ್ಚಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಕರಾಟೆ ಕಲೆಯನ್ನು ಶ್ರದ್ಧೆಯಿಂದ ಕಲಿತರೆ ಬ್ಲಾಕ್ ಬೆಲ್ಟ್ ಪಡೆಯಬಹುದು. ಬ್ಲಾಕ್ ಬೆಲ್ಟ್ ಕಲಿತ ಹೆಣ್ಣುಮಕ್ಕಳು ಎಂಥ ಕಠಿಣ ಸಂದರ್ಭವನ್ನೂ ಎದುರಿಸಬಲ್ಲರು ಎಂದು ಅವರು ಹೇಳಿದರು.
ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇತ್ತೀಚಿನ ಎಸ್ ಎಸ್ ಎಲ್ ಸಿ ಫಲಿತಾಂಶ ವಸತಿ ಶಾಲೆಯ ಗುಣಮಟ್ಟವನ್ನು ದಾಖಲಿಸಿದೆ ಎಂದ ಸಚಿವರು, ವಸತಿ ಶಾಲೆಯಲ್ಲಿ ಓದಿದ ಮಕ್ಕಳು ದೇಶದ ಅತ್ಯುನ್ನತ ಐಐಟಿ, ಐಐಎಂಗಳಲ್ಲಿ ಪ್ರವೇಶ ಪಡೆಯುತ್ತಿರುವುದು ನಮ್ಮ ಸರ್ಕಾರದ ಹೆಮ್ಮೆ ಎಂದು ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್ , ಕಿತ್ತೂರರಾಣಿ ಚೆನ್ನಮ್ಮವಸತಿ ಶಾಲೆಯ ಪ್ರಾಂಶುಪಾಲರಾದ ಪವಿತ್ರ, ನಿಲಯಪಾಲಕಿ ಆಮಿನಾಬಾನು, ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಮಹೇಶ್, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಗವಿಮಠದ ಮೊರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲರಾದ ಪ್ರಸನ್ನಕುಮಾರ್, ಮರಡಿಲಿಂಗೇಶ್ವರ ಕ್ಷೇತ್ರದ ಮೊರಾರ್ಜಿ ವಸತಿಶಾಲೆಯ ಪ್ರಾಂಶುಪಾಲ ಡಾ.ರಾಮಾನಾಯಕ್ ಸೇರಿ ಸ್ಥಳೀಯ ಮುಖಂಡರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು ಸಭೆ ನಡೆಸಿದರು.
ವರದಿ.ಡಾ.ಕೆ.ಆರ್.ನೀಲಕಂಠ.
ಕೃಷ್ಣರಾಜಪೇಟೆ, ಮಂಡ್ಯ.
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ