April 27, 2024

Bhavana Tv

Its Your Channel

ಮಾತಾಡ್ ಮಾತಾಡ್ ಕನ್ನಡ ಅಭಿಯಾನದಡಿ ಕನ್ನಡ ಪ್ರತಿಜ್ಞಾವಿಧಿ ಕಾರ್ಯಕ್ರಮ

ಮಳವಳ್ಳಿ: ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಅನ್ಯ ಭಾಷೆಗಳಿಗೆ ಮಣೆ ಹಾಕುತ್ತಿರುವುದರಿಂದ ಕನ್ನಡ ಮಾತಾಡುವವರ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ ಎಂದು ಡಾ.ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ವಿಷಾಧ ವ್ಯಕ್ತಪಡಿಸಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದಡಿ ಕನ್ನಡ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಅನ್ಯ ಭಾಷೆಗಳ ದಬ್ಬಾಳಿಕೆಗೆ ಒಳಗಾಗಿ ನಮ್ಮವರು ನಮ್ಮ ಮಾತೃ ಭಾಷೆ ಕನ್ನಡವನ್ನು ಕಡೆಗಣಿಸುತ್ತಿದ್ದಾರೆ. ಕನ್ನಡ ಭಾಷೆ ಕುರಿತು ಅಭಿಮಾನ ಬೆಳೆಸಿಕೊಳ್ಳಬೇಕು. ಬೆಂಗಳೂರು ಸೇರಿದಂತೆ ಎಲ್ಲೆಡೆ ಇಂದಿನ ಯುವ ಜನತೆ ಆಂಗ್ಲ ಭಾಷೆಗೆ ಹೆಚ್ಚಿನ ಹೊತ್ತು ಕೊಡುತ್ತಿದ್ದು, ಅದನ್ನು ವಿದ್ಯಾಭ್ಯಾಸ ಮತ್ತು ವ್ಯವಹಾರಿಕವಾಗಿ ಮಾತ್ರ ಬಳಕೆ ಮಾಡಿಕೊಂಡು ತಾಯಿ ಸಮನಾದ ಕನ್ನಡ ಭಾಷೆಯನ್ನು ಬೆಳೆಸಲು ಮುಂದಾಗಬೇಕು ಎಂದರು.

ಪುರಸಭೆ ಉಪಾಧ್ಯಕ್ಷ ಟಿ.ನಂದಕುಮಾರ್ ಮಾತನಾಡಿ, ನಮ್ಮ ಕನ್ನಡ ಭಾಷೆಗೆ ೮ ಜ್ಞಾನಪೀಠ ಪ್ರಶಸ್ತಿಗಳ ಜತೆಗೆ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಅನ್ನಕೊಡುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಮುಖ್ಯಾಧಿಕಾರಿ ಪವನ್ ಕುಮಾರ್ ಕನ್ನಡ ಪ್ರತಿಜ್ಞಾವಿಧಿ ಬೋಧಿಸಿದರು.
ಪುರಸಭೆ ಸದಸ್ಯರಾದ ಎಂ.ಟಿ.ಪ್ರಶಾAತ್, ರವಿ, ಕುಮಾರ್, ಸಿದ್ದರಾಜು, ರಾಜಶೇಖರ್, ಶಿವಕುಮಾರ್, ಮುಖಂಡರಾದ ಪೊತ್ತಂಡೆ ನಾಗರಾಜು, ಅಂಕರಾಜು, ಪೌರಕಾರ್ಮಿಕ ಸಂಘದ ಅಧ್ಯಕ್ಷ ಭೈರಪ್ಪ ಸೇರಿದಂತೆ ಪುರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಇದ್ದರು.
ತಾಲ್ಲೂಕು ಆಡಳಿತದ ವತಿಯಿಂದ ವಿಶ್ವಪ್ರಸಿದ್ಧ ಪ್ರವಾಸಿತಾಣ ತಾಲ್ಲೂಕಿನ ಶಿವಸಮುದ್ರದ ಬಳಿಯ ಗಗನಚುಕ್ಕಿಯಲ್ಲಿ ಹಾಗೂ ಪಟ್ಟಣದ ಸೇರಿದಂತೆ ತಾಲ್ಲೂಕಿನ ಎಲ್ಲೆಡೆ ಸರ್ಕಾರಿ ಕಚೇರಿಗಳಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನದಡಿ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು.
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮಳವಳ್ಳಿ ಪಟ್ಟಣ, ಗ್ರಾಮಾಂತರ, ಹಾಗೂ ಹಲಗೂರು ವೃತ್ತಕ್ಕೆ ಸೇರಿದ ಪೊಲೀಸ್ ಸಿಬ್ಬಂದಿ ಸಾಮೂಹಿಕವಾಗಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಕನ್ನಡ ಗೀತೆಯನ್ನು ಹಾಡಿದರು.
ಡಿವೈಎಸ್ಪಿ ಲಕ್ಷ್ಮಿ ನಾರಾಯಣ ಪ್ರಸಾದ್, ಸರ್ಕಲ್ ಇನ್ಸ್ ಪೆಕ್ಟರ್ ಎ ಕೆ ರಾಜೇಶ್, ಧನರಾಜ್, ಹೆಚ್ ಟಿ ಸುನಿಲ್ ಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: