May 2, 2024

Bhavana Tv

Its Your Channel

ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಪೋಷಕರು ವಿರೋಧ

ಮಳವಳ್ಳಿ: ತಾಲ್ಲೂಕಿನ ಬಾಚನಹಳ್ಳಿ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಕೆಲ ಪೋಷಕರು ವಿರೋಧ ವ್ಯಕ್ತಪಡಿಸಿದ ಘಟನೆ ಮಂಗಳವಾರ ಸಂಜೆ ನಡೆಯಿತು.
ತಾಲ್ಲೂಕಿನಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲಿದ್ದು, ಹೀಗಾಗಿ ತಾಲ್ಲೂಕು ಆಡಳಿತ ಪಟ್ಟಣದ ಕೆಎಸ್ ಆರ್ ಟಿಸಿ ತರಬೇತಿ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ವಡ್ಡರಹಳ್ಳಿ ವಸತಿ ಶಾಲೆಯನ್ನು ಕೋವಿಡ್ ಕೇಂದ್ರಗಳಾಗಿ ಮಾಡಲಾಗಿದೆ. ಅಲ್ಲದೆ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಹಾಗೂ ಹೆಚ್ಚುವರಿ ಕೋವಿಡ್ ಕೇಂದ್ರಗಳನ್ನು ಮಾಡಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲು ಪೋಷಕರಿಗೆ ಸೂಚನೆ ನೀಡಲಾಗಿತ್ತು.
ಆದರೆ ಕೆಲ ಪೋಷಕರು ಈಗಾಗಲೇ ಕಳೆದ ಎರಡು ವರ್ಷಗಳಿಂದ ನಮ್ಮ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಿದ್ದು, ಶಾಲೆಯಲ್ಲಿ ಪಾಠದ ಜೊತೆಗೆ ಸೋಂಕಿನಿಂದ ರಕ್ಷಣೆ ಸಿಗುತ್ತದೆ. ಜೊತೆಗೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸ್ ಎಲ್ ಎಲ್ ಸಿ ತರಗತಿಯನ್ನಾದರೂ ನಡೆಸಬೇಕು. ಶಾಲೆಯನ್ನು ಕೋವಿಡ್ ಕೇಂದ್ರ ಮಾಡುವುದರಿಂದ ಮತ್ತೆ ತರಗತಿ ಆರಂಭವಾದರೆ ಮಕ್ಕಳ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದರು.
ಈ ಬಗ್ಗೆ ಮಾಹಿತಿ ತಿಳಿದ ತಹಶೀಲ್ದಾರ್ ಎಂ.ವಿಜಯಣ್ಣ ಶಾಲೆಗೆ ಭೇಟಿ ನೀಡಿ ತಾಲ್ಲೂಕಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ವಸತಿ ಶಾಲೆಗಳನ್ನು ಕೋವಿಡ್ ಕೇಂದ್ರಗಳಾಗಿ ಮಾಡಲಾಗುತ್ತಿದೆ. ಅಲ್ಲದೆ ಎಸ್ ಎಲ್ ಎಲ್ ಸಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ತರಗತಿ ಹಾಗೂ ಪಾಠ ಪ್ರವಚನದ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದರ ಬಗ್ಗೆ ಭರವಸೆ ನೀಡಿದ ನಂತರ ಪೋಷಕರು ತಮ್ಮ ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋದರು

ವರದಿ; ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: